ಕ್ರೈಂ ವಾರ್ತೆ

ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣ: ಗ್ರಾಮಕರಣಿಕ ಮತ್ತು ಗ್ರಾಮ ಸಹಾಯಕನಿಗೆ ಜಿಲ್ಲಾ ನ್ಯಾಯಾಲಯ ಶಿಕ್ಷೆ

ಬೆಳ್ತಂಗಡಿ: ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಗ್ರಾಮಕರಣಿಕ ಮತ್ತು ಗ್ರಾಮ ಸಹಾಯಕನಿಗೆ ಜಿಲ್ಲಾ ನ್ಯಾಯಾಲಯ ಶಿಕ್ಷೆ ವಿಧಿಸಿ‌ ತೀಪು೯ ನೀಡಿದೆ.

ಬಾಯ೯ ‌‌ಗ್ರಾಮಕರಣಿಕರಾಗಿದ್ದ ಎನ್.ಶೇಷಾದ್ರಿ ಮತ್ತು ಗ್ರಾಮ ಸಹಾಯಕರಾಗಿದ್ದ ತಿಮ್ಮಪ್ಪ ಪೂಜಾರಿ ಶಿಕ್ಷೆಗೊಳಗಾದವರು.

2014ರ ಜೂ.24ರಂದು ವಾಸದ ಮನೆಯನ್ನು ಸಕ್ರಮಗೊಳಿಸುವ ಸಂಬಂಧ ಬೆಳ್ತಂಗಡಿ ತಾಲೂಕಿನ ಬಾಯ೯ ಗ್ರಾಮದ ಮೂರುಗೋಳಿ ಗ್ರಾಪಂ ಕಚೇರಿಯಲ್ಲಿ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದರು. ಆಗ ತೆಕ್ಕಾರು , ಬಾರ್ಯ, ಪುತ್ತಿಲ ಗ್ರಾಮದ ಗ್ರಾಮಕರಣಿಕರಾಗಿದ್ದ ಎನ್. ಶೇಷಾದ್ರಿ ಮತ್ತು ಗ್ರಾಮ ಸಹಾಯಕರಾಗಿದ್ದ ತಿಮ್ಮಪ್ಪ ಪೂಜಾರಿ ‌ರೂ.15 ಸಾವಿರ ಲಂಚದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಆ ವ್ಯಕ್ತಿಯು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.

ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ.ಜಕಾತಿ ವಿಚಾರಣೆ ನಡೆಸಿ ಜೂ.15ರಂದು ತೀರ್ಪು ನೀಡಿ ಆರೋಪಿಗಳಿಗೆ ಕಲಂ 235 ಸಿಆರ್‌ಪಿಸಿ ಅಡಿಯಲ್ಲಿ ಪಿಸಿ ಕಾಯಿದೆ 1988 ಕಲಂ 7ರಂತೆ 3 ವರ್ಷಗಳ ಸಾದಾ ಶಿಕ್ಷೆ ಮತ್ತು 20,000 ರೂ. ದಂಡ ವಿಧಿಸಿದ್ದಾರೆ. ಆರೋಪಿಗಳು ದಂಡ ಕಟ್ಟಲು ವಿಫಲವಾದರೆ ಹೆಚ್ಚುವರಿ 8 ತಿಂಗಳ ಸಾದಾ ಶಿಕ್ಷೆ ಅನುಭವಿಸುವಂತೆ ಆದೇಶಿಸಿದ್ದಾರೆ.

ನಿಮ್ಮದೊಂದು ಉತ್ತರ