ಬೆಳ್ತಂಗಡಿ: ಸಾರಿಗೆ ನಿಗಮಗಳ ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕು ಹಾಗೂ ೬ನೇ ವೇತನ ಆಯೋಗದ ಶಿಫಾರಸು ಮಾದರಿಯಲ್ಲಿ ವೇತನ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು ಸೇವೆ ಬಹಿಷ್ಕರಿಸಿ ಎ.7 ರಿಂದ ನಡೆಸಿದ ಅನಿರ್ಧಿಷ್ಟಾವಧಿ ಮುಷ್ಕರದಿಂದಾಗಿ ಬೆಳ್ತಂಗಡಿ ತಾಲೂಕಿನಲ್ಲಿಯೂ ಯಾವುದೇ ಕೆಎಸ್ಸಾರ್ಟಿಸಿ ಬಸ್ ರಸ್ತೆಗಿಳಿಯದೆ ದೂರದ ಊರುಗಳಿಗೆ ಹೋಗುವ ಪ್ರಯಾಣಿಕರಿಗೆ ಸಂಕಷ್ಟ ಎದುರಾಯಿತು.
೬ನೇ ವೇತನ ಆಯೋಗದ ರೀತಿಯಲ್ಲಿ ವೇತನ ಏರಿಕೆ ಸಾಧ್ಯವಿಲ್ಲ. ಮಾತ್ರವಲ್ಲ ಈ ಕುರಿತು ಸಾರಿಗೆ ನೌಕರರೊಂದಿಗೆ ಸಂಧಾನ ಮಾತುಕತೆ ನಡೆಸುವುದಿಲ್ಲ ಎಂದು ಸರಕಾರ ಸಷ್ಟಪಡಿಸಿದ ಹಿನ್ನಲೆಯಲ್ಲಿ ಸಾರಿಗೆ ಇಲಾಖೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಆದರೆ ನೌಕರರು ಬೀದಿಗಿಳಿದು ಪ್ರತಿಭಟನೆ ನಡೆಸುವುದಿಲ್ಲ ಬದಲಿಗೆ ಕೆಲಸಕ್ಕೆ ಗೈರು ಹಾಜರಾಗಿ ಮನೆಯಲ್ಲೇ ಉಳಿದುಕೊಂಡಿದ್ದಾರೆ.
ಕಳೆದ ವರ್ಷ ಡಿ.೧೧ ರಂದು ಏಕಾಏಕಿ ಮುಷ್ಕರ ನಡೆಸಿದ್ದ ಸಾರಿಗೆ ನೌಕರರು ಸರಕಾರಕ್ಕೆ ನೀಡಿರುವ ಗಡುವು ಮುಕ್ತಾಯವಾಗಿದ್ದರೂ ೬ನೇ ವೇತನ ಆಯೋಗ ಅನುಷ್ಠಾನ ಮಾಡಿಲ್ಲ ಹೀಗಾಗಿ ರಾಜ್ಯದ ಎಲ್ಲಾ ನಿಗಮಗಳ ಸಾರ್ವಜನಿಕ ಸಾರಿಗೆ ಸಂಚಾರ ಮುಷ್ಕರ ಹೂಡುತ್ತಿದ್ದೇವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ ತಿಳಿಸಿದೆ.
ರಸ್ತೆಗಿಳಿಯದ ಬಸ್ಸುಗಳು:
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಕೆಎಸ್ಸಾರ್ಟಿಸಿ ಡಿಪ್ಪೋದ ನೌಕರರು ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದರಿಂದ ಯಾವುದೇ ಬಸ್ಸು ರಸ್ತೆಗಿಳಿಯಲಿಲ್ಲ. ಇದರಿಂದಾಗಿ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು, ಸರಕಾರಿ ಕಚೇರಿಗಳಿಗೆ ಬರುವ ಸಿಬ್ಬಂದಿಗಳಿಗೆ, ದೂರದ ಊರುಗಳಿಗೆ ಹೋಗುವ ಪ್ರಯಾಣಿಕರಿಗೆ ಬಹಳಷ್ಟು ಸಮಸ್ಯೆಯಾಯಿತು. ಬೆಳ್ತಂಗಡಿ ತಾಲೂಕಿನ ಪ್ರಮುಖ ರಸ್ತೆಗಳಲ್ಲಿ ಖಾಸಗಿ ಬಸ್ಸು, ಜೀಪು, ರಿಕ್ಷಾ, ಮ್ಯಕ್ಸಿಕ್ಯಾಬ್ ಮೊದಲಾದ ವಾಹನಗಳು ಓಡಾಟ ನಡೆಸಿದ್ದು, ಪ್ರಯಾಣಿಕರಿಗೆ ಸೇವೆಯನ್ನು ನೀಡಿದೆ. ಪುತ್ತೂರು ಮತ್ತು ಮಂಗಳೂರು ಡಿಪ್ಪೋದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಬಸ್ಸುಗಳ ಸಂಚಾರವೂ ಸ್ಥಗಿತಗೊಂಡಿತ್ತು.